ಪ್ರಹ್ಲಾದ್ ಜೋಶಿ ಕೇಂದ್ರದ ಜಾತಿಗಣತಿ ಉದ್ದೇಶ ಬಹಿರಂಗಪಡಿಸಲಿ:ಸಿದ್ಧರಾಮಯ್ಯ ಒತ್ತಾಯ
ಕರ್ನಾಟಕ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯನ್ನು ವಿರೋಧಿಸುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸರಕಾರ ನಡೆಸಲು ಉದ್ಧೇಶಿಸಿರುವ ಜಾತಿ ಗಣತಿಯ ಉದ್ಧೇಶವನ್ನು ಜನರಿಗೆ ತಿಳಿಸಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನಗಣತಿಯ ಪ್ರಗತಿಯ ಬಗ್ಗೆ ವಿವರಿಸಿದರು
ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
ಮತಾಂತರ ಹಾಗೂ ಜಾತಿಗಳನ್ನು ಒಡೆಯುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸಮೀಕ್ಷೆ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆ ಅವರ ಅಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರ ಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್ ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದವರು ಹೇಳಿದರು.


